ಹತ್ಯೆಯೋ ಹನ್ಯತೆಯೋ ವಿಜಯವೋ ಪರಿಭವವೋ ।
ಕ್ಷತ್ರಿಯಂ ಸ್ವಾರ್ಥಮಂ ಗಣಿಸುವನೆ ರಣದೊಳ್? ।।
ಕೃತನಿರ್ಣಯ ಬಾಹ್ಯಲಾಭನಷ್ಟದಿನಲ್ಲ ।
ಆತ್ಮಋಣವದು ಜಗಕೆ -- ಮಂಕುತಿಮ್ಮ ।।

— ಡಿ.ವಿ.ಜಿ.

ನನ್ನ ತೊದಲು ತುಟಿಗಳಿಗೆ ಪ್ರಾರ್ಥಿಸಲು ಕಲಿಸಿದಿರಿ,
ನನ್ನ ತಪ್ಪಡಿಗಳನು ತಿದ್ದುತ್ತ ಜೊತೆಯಲ್ಲೆ ಸಾಗಿದಿರಿ,
ಕೈಹಿಡಿದು ಬರೆಸಿ ಕೈಬರಹವನ್ನು ಚೆಂದಗಾಣಿಸಿದಿರಿ,
ನನ್ನ ಚಿತ್ತಭಿತ್ತಿಯಲಿ ನೂರಾರು ಬಣ್ಣಗಳ ತುಂಬಿದಿರಿ.

ನಾನು ಕಲಿತಷ್ಟೂ ಕಲಿಸುವ ಉತ್ಸಾಹವಿತ್ತು ನಿಮ್ಮಲ್ಲಿ,
ನಿಮ್ಮಿಂದಾಗಿಯೆ ಕಲಿಕೆಯ ಹಂಬಲ ಚಿಗುರಿತ್ತು ನನ್ನಲ್ಲಿ.
ನೀವು ಕಲಿಸುವಾಗಲೆಲ್ಲ ಆಗುತ್ತಿತ್ತು ಪಾಠವೂ ಆಟ!
ದಿನಕಳೆದಂತೆ ಹತ್ತಿರವಾಗುತ್ತಿತ್ತು ನಮ್ಮೀ ಒಡನಾಟ.

ಹಂಚಿಕೊಂಡಿರಿ ನನ್ನೊಡನೆ ಸಂತಸದ ಘಳಿಗೆಗಳ
ಮುಚ್ಚಿಟ್ಟಿದ್ದು ಸರಿಯೆ ನಿಮ್ಮ ಯಾತನೆ-ತಳಮಳ?
ವಾಸಿಯಾಗದ ಖಾಯಿಲೆಯಿಂದ ನರಳುತ್ತಿದ್ದರೂ ನೀವು,
ನನ್ನೊಂದು ಸಾಧನೆ ಮರೆಸುತ್ತಿತ್ತು ನಿಮ್ಮೆಲ್ಲ ನೋವು.

ನನ್ನ ಪ್ರಗತಿಯನು ಕಂಡು ಹಿರಿ-ಹಿರಿ ಹಿಗ್ಗಿದ್ದು ನೀವೇ,
ನನಗಿಂತ ಹೆಚ್ಚು ಭವಿಷ್ಯದ ಕನಸು ಕಂಡಿದ್ದೂ ನೀವೇ;
ಬೀಜ ಬಿತ್ತಿ, ನೀರು-ಗೊಬ್ಬರವೆರೆದು ಪೋಷಿಸಿದ ನೀವೇ
ಮರವಾಗುವ ತನಕ ಕಾಯದೇ ಹೋದದ್ದು ನ್ಯಾಯವೇ? 

ಇಂದು, ನಾನು ಅಪ್ಪ ಆಗುತ್ತಿರುವ ಸಮಯದಲ್ಲಿ,
ಬರಿಯ ನಿಮ್ಮ ನೆನಪೇ ತುಂಬಿದೆ ನನ್ನ ಮನದಲ್ಲಿ.
ಏಕಿರಬೇಕು ನೀವು ಎಲ್ಲೋ ದೂರದಲ್ಲಿ ದೇವರ ಬಳಿ?
ಬಂದುಬಿಡಿ ಅಪ್ಪ, ನಮ್ಮ ಕಂದನ ರೂಪ ತಾಳಿ!

0
~.~

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.

ಕಿವಿಯ ನಾಡಿನ ಕವಿಗೆ ಸ್ವಾಗತ!

benaka's picture

ಕಿವಿಯ ನಾಡಿನ ಕವಿಗೆ ಸ್ವಾಗತ!

ಚೆನ್ನಿಹುದು ಚೆನ್ನಿಹುದು ಕವನ
ಅಕ್ಕರೆಯ ತಂದೆಗಿದು ನಮನ
ಮಗನಲಾಗಲವನ ಮರುಜನನ!
ಮನೆಯಾಗಲಿ ಸುಖದ ಸದನ

ನಿಮ್ಮವ

ಬೆನಕ

ಕನ್ನಡಪುಟ.ಬ್ಲಾಗ್‍ಸ್ಪಾಟ್.ಕಾಂ.

ನೀವು 'ಅಪ್ಪ' ಆಗುತ್ತಿರುವುದಕ್ಕೆ ಅಭಿನಂದನೆಗಳು!

kaaloo's picture

ಎಲ್ಲಾ ಕಡೆಗೆ 'ಅಪ್ಪನ ಕುರಿತು ಪದ್ಯಗಳನ್ನ ಯಾರೂ ಬರೆದೇ ಇಲ್ಲ' ಅಂತ ಆಡಿಕೊಳ್ಳುತ್ತಿರೋ ಹೊತ್ತಿಗೆ ನಿಮ್ಮ ಕವನ ಅದ್ಭುತವಾಗಿದೆ.  ಚಿಕ್ಕ ವಯಸ್ಸಿನಲ್ಲಿ ತಂದೆಯನ್ನ ಕಳೆದುಕೊಂಡ ನಮ್ಮೆಲ್ಲರ ನೋವನ್ನ ಈ ಪದ್ಯದಲ್ಲಿ ಹಿಡಿದು ಹಾಕಿದ್ದೀರಿ.

ನೀವು 'ಅಪ್ಪ' ಆಗುತ್ತಿರುವುದಕ್ಕೆ ಅಭಿನಂದನೆಗಳು!

kaaloo

http://kaalachakra.blogspot.com/

Syndicate content