ಮುಂಬೈನ ಪರಿಚಯ
ಮುಂಬಯಿ ನಮ್ಮ ದೇಶದ ವಾಣಿಜ್ಯ ರಾಜಧಾನಿ. ಇದು ಮೊದಲು ಪ್ರತ್ಯೇಕ ಸಂಸ್ಥಾನವಾಗಿತ್ತು. ಆಗ ಗುಜರಾತಿನ ಕೆಲವು ಪ್ರದೇಶಗಳೂ ಇದರೊಡನೆ ಸೇರಿತ್ತು. ಆಗಿನ ಪ್ರಸಿದ್ಧ ಮುಖ್ಯಮಂತ್ರಿಗಳಾಗಿದ್ದವರಲ್ಲಿ ದಿವಂಗತ ಮೊರಾರ್ಜಿ ದೇಸಾಯಿಯವರೊಬ್ಬರು. ಮುಂಬಯಿಯ ಮತ್ತು ಕನ್ನಡಿಗರ ನಂಟು ತುಂಬಾ ಹಳೆಯದ್ದು. ಮುಂಬಯಿಗೆ ಮೊದಲು ಎಲ್ಲರೂ ಬಾಂಬೇ ಎಂದೇ ಕರೆಯುತ್ತಿದ್ದರು. ಆದರೆ ಕನ್ನಡದವರು ಮಾತ್ರವೇ ಮುಂಬಯಿ ಎಂದು ಕರೆಯುತ್ತಿದ್ದರು. ಮಹಾರಾಷ್ಟ್ರದ ಕೊಯ್ನಾ ಅಣೆಕಟ್ಟಿನ ಕೆಲಸ ಪ್ರಾರಂಭಿಸಿದವರು ಮೋಕ್ಷಗುಂಡಂ ವಿಶ್ವೇಶ್ವರಯ್ಯನವರು. ಮುಂಬಯಿನ ಜನಸಂಖ್ಯೆ ೧.೨೦ ಕೋಟಿ ಮತ್ತು ಅದರಲ್ಲಿ ಕನ್ನಡಿಗರ ಪಾಲು ಶೇಕಡ ೧೦ ಅಂದ್ರೆ ೧೨ ಲಕ್ಷ. ಆದರೂ ಹೊರಗಡೆ ಕನ್ನಡ ಮಾತನಾಡೋದು ಕಡಿಮೆ. ಇದಕ್ಕೆ ಕಾರಣ ಈ ಮುಂದೆ ಹೇಳುತ್ತಿದ್ದೀನಿ.
ಕರ್ನಾಟಕದಲ್ಲಿ ಉಡುಪಿ ಅಂದ್ರೆ ಎಲ್ಲರಿಗೂ ನೆನಪಾಗುವುದು - ಉಡುಪಿಯ ಅಷ್ಟ ಮಠಗಳು, ಶ್ರೀ ಕೃಷ್ಣ ದೇವಸ್ಥಾನ. ಆದರೆ ಮುಂಬಯಿಯಲ್ಲಿ ಉಡುಪಿ ಅಂದ್ರೆ ಜನಗಳಿಗೆ ಮೊದಲು ನೆನಪಾಗುವುದು ಮಸಾಲೆ ದೋಸೆ, ನಂತರ ರಾಮಾನಾಯಕರ ಉಡುಪಿ ಶ್ರೀ ಕೃಷ್ಣ ಭವನವಾದ ಊಟದ ಹೊಟೇಲು. ಇಲ್ಲಿಯ ಹೆಚ್ಚಿನ ಹೊಟೇಲುಗಳಲ್ಲಿ ನೀವು ಕಾಣಬರುವ ದೃಶ್ಯ ಅಂದ್ರೆ -
ಹೊಟೇಲಿನ ಮುಂಭಾಗದಲ್ಲಿ ಮೋಸಂಬಿ ಹಣ್ಣುಗಳ ತಳಿರು ತೋರಣ - ಬಲಭಾಗದಲ್ಲಿ ಗಲ್ಲದ ಮೇಲೆ ಕುಳಿತಿರೋ ಯಜಮಾನ - ಕೈಯಲ್ಲಿ ಉದಯವಾಣಿ ಅಥವಾ ಕರ್ನಾಟಕ ಮಲ್ಲ ವೃತ್ತಪತ್ರಿಕೆ - ಹಿಂದೆ ಯಜಮಾನರ ಊರಿನ ದೇವರ ಫೋಟೋ - ಅದರ ಮುಂದೆ ಸದಾ ಬೆಳಗುತ್ತಿರುವ ದೀಪ ಮತ್ತು ಎರಡು ಊದಿನಕಡ್ಡಿಗಳು. ಹೆಚ್ಚಿನವೆಲ್ಲಾ ಶಾಕಾಹಾರಿ ಉಪಹಾರಗೃಹಗಳು. ಮಾಂಸಾಹಾರಿ ಮತ್ತು ಡ್ಯಾನ್ಸ್ ಬಾರ್ ಗಳಿಗೇನೂ ಕಡಿಮೆ ಇಲ್ಲ - ಅಲ್ಲೂ ಇದೇ ತರಹದ ದೃಶ್ಯ. ಹೆಚ್ಚಿನ ಜನಗಳು ಇಲ್ಲಿಗೆ ಬರೋದು - ಇಡ್ಲಿ, ದೋಸೆ ಅಥವಾ ಉದ್ದಿನ ವಡೆ ತಿನ್ನಲು. ಇನ್ನೊಂದು ವಿಶೇಷತೆ ಏನಂದ್ರೆ - ನಮ್ಮ ಬೆಂಗಳೂರಿನಲ್ಲಿ ಕೊಡುವ ಹಾಗೆ ೧ ಪ್ಲೇಟ್ ಇಡ್ಲಿ ಅಂದ್ರೆ - ೨ ಇಡ್ಲಿ ಕೊಡೋದಿಲ್ಲ, ಕೊಡೋದು ಒಂದೇ. ಇಡ್ಲಿ ಜೊತೆ ವಡೆ ಇಲ್ಲ. ಕೇಳಿದ್ರೆ ಎರಡನ್ನೂ ಬೇರೆ ಬೇರೆ ತಾಟುಗಳಲ್ಲಿ ನೀಡುತ್ತಾರೆ. ಚೌಚೌ ಬಾತ್ ಅಂತೂ ಗೊತ್ತೇ ಇಲ್ಲ. ಅದೇ ಉಪ್ಮ ಅಂದ್ರೆ ಉಪ್ಪಿಟ್ಟು ಮತ್ತು ಶಿರಾ ಅಂದ್ರೆ ಸಜ್ಜಿಗೆ. ಕೇಸರಿಬಾತ್ ಮಾಡೋಲ್ಲ. ಆದರೂ ಇಲ್ಲಿಯ ತಿನಿಸುಗಳ ದರ ತುಂಬಾ ಜಾಸ್ತಿ. ಒಂದು ಮಸಾಲೆ ದೋಸೆಗೆ ರೂ. ೩೫ ಅಂದ್ರೆ ನಂಬ್ತೀರಾ? ಇಲ್ಲಿ ದರ್ಶಿನಿಗಳಂಥ ಹೊಟೆಲ್ ಗಳಿಲ್ಲ. ಯಾರಾದ್ರೂ ಬಂದು ದರ್ಶಿನಿ ಶುರು ಮಾಡಿದ್ರೆ - ಬಹಳ ಬೇಗ ಶ್ರೀಮಂತರಾಗಬಹುದು. ಹಾಗೆ ಮಾಡೋದು ಕಷ್ಟ ಕೂಡಾ. ಈ ಹೊಟೆಲ್ ನವರು ರಕ್ಷಣೆಗಾಗಿ ( ಪೊಲೀಸರಿಂದ ಮತ್ತು ರೌಡಿಗಳಿಂದ ) ನಿಯಮಿತವಾಗಿ ಹಣ ನೀಡಬೇಕು. ಇದನ್ನು ಹಫ್ತಾ ಎನ್ನುತ್ತಾರೆ. ಹಿಂದಿಯಲ್ಲಿ ಹಫ್ತಾ ಅಂದ್ರೆ ವಾರ ಅಂತ. ಹಾಗೇ ಇದನ್ನು ವಾರಕ್ಕೊಮ್ಮೆ ಕೊಡಬೇಕು. ಇದೂ ಒಂದು ದೊಡ್ಡ ದಂಧೆಯೇ. ಇದರಲ್ಲೂ ನಮ್ಮ ಕನ್ನಡಿಗರು ಹೆಸರುವಾಸಿಯಾಗಿದ್ದಾರೆ - ಶೆಟ್ಟಿ ಗ್ಯಾಂಗ್ ಅಂದ್ರೆ ಯಾರಿಗೆ ಗೊತ್ತಿಲ್ಲ.
ಇಷ್ಟೆಲ್ಲಾ ಪ್ರಸಿದ್ಧರಾದರೂ ಕನ್ನಡಿಗರು ಕನ್ನಡ ಮಾತನಾಡುವುದು ಬಹು ಕಡಿಮೆ. ತುಳು ಅಥವಾ ಕೊಂಕಣಿ ಮಾತನಾಡುವುದು ಹೆಚ್ಚು. ಆದರೆ ಓದುವುದು ಮಾತ್ರ ಕನ್ನಡ ಭಾಷೆಯನ್ನು. ಇನ್ನು ಕನ್ನಡ ಸಂಘಗಳಿವೆ. ಆದರೆ ಈಗೀಗ ಚಟುವಟಿಕೆ ಕಡಿಮೆ ಆಗ್ತಿದೆ. ಇಲ್ಲಿಯ ಮಾತುಂಗ ಒಂದು ಕಾಲದಲ್ಲಿ ಮಿನಿ ಕನ್ನಡ ನಾಡು ಆಗಿತ್ತು. ಇಲ್ಲಿ ಶಂಕರಮಠ ಈಗ ತಮಿಳು ಅಯ್ಯರ್ ಗಳ ತಾಣವಾಗಿದೆ. ಇಲ್ಲೇ ಇರುವ ಹಿಂದೆ ಸುಪ್ರಸಿದ್ಧವಾದ ಕನ್ನಡ ಕನ್ಸರ್ನ್ ಈಗ ಕಾಫಿಪುಡಿ ಮಾರಾಟ ಕೇಂದ್ರವಾಗಿದೆ. ಇಲ್ಲಿಯ ಷಣ್ಮುಖಾನಂದ ಹಾಲ್ ಒಂದು ಕಾಲದಲ್ಲಿ ಕನ್ನಡಿಗರ ಮನರಂಜನೆಯ ಕೇಂದ್ರವಾಗಿತ್ತು. ಈಗ ಮಾತುಂಗದಲ್ಲಿ ಕನ್ನಡಿಗರ ಸಂಖ್ಯೆ ಕಡಿಮೆ ಆಗಿದೆ. ಕನ್ನಡಿಗರು ಗೋರೆಗಾಂವ್ ಕಡೆ ( ಪಶ್ಚಿಮ ರೇಲ್ವೆ ) ಮತ್ತು ಡೊಂಬಿವಿಲಿ ( ಕೇಂದ್ರ ರೇಲ್ವೆ ) ಗಳಲ್ಲಿ ವಾಸಿಸುತ್ತಿದ್ದಾರೆ.
ಉತ್ತರ ಕರ್ನಾಟಕ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಮುಂತಾದ ಜಿಲ್ಲೆಗಳ ಜನಗಳು ಪ್ರಾಥಮಿಕ ಓದು ಮುಗಿದೊಡನೆ ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಲು ಮುಂಬಯಿಗೆ ಬರುತ್ತಿದ್ದರು. ೧೯೭೦ರವರೆಗೂ ಎಲ್ಲ ಕಡೆಗಳಲ್ಲೂ ಉದ್ಯೋಗಸ್ಥರಲ್ಲಿ ಹೆಚ್ಚಿನವರು ಕನ್ನಡಿಗರು, ತಮಿಳರು ಮತ್ತು ತೆಲುಗಿನವರು. ಇನ್ನೂ ವ್ಯಾಪಾರದಲ್ಲಿ ಪಾರಸಿಗಳು, ಗುಜರಾತಿಗಳು ಮತ್ತು ಮಾರವಾಡಿಗಳು. ಸಣ್ಣ ಪುಟ್ಟ ವ್ಯಾಪಾರಗಳಾದ ಹಾಲು ಮಾರಾಟ, ತರಕಾರಿ ಹಣ್ಣುಗಳು ವ್ಯಾಪಾರ ಇತ್ಯಾದಿಯಲ್ಲಿ ಉತ್ತರ ಭಾರತೀಯರದ್ದೇ ಹೆಚ್ಚಿನ ಪಾಲು. ೧೯೭೦ರಲ್ಲಿ ಇದನ್ನೇ ವಿಷಯವಾಗಿಸಿಕೊಂಡು ಸ್ವಕ್ಷೇತ್ರದಲ್ಲಿರುವ ಮರಾಠಿಗರಿಗೆ ಅನ್ಯಾಯ ಆಗುತ್ತಿದೆ - ಕೆಲಸಗಳಲ್ಲಿ ಆದ್ಯತೆ ಇಲ್ಲ ಎಂದು ಚಳುವಳಿ ಆರಂಭವಾಯಿತು. ಈ ಚಳುವಳಿಯನ್ನು ಹುಟ್ಟು ಹಾಕಿದ್ದು ಶಿವಸೈನಿಕರು. ಶ್ರೀಯುತ ಬಾಳಾಸಾಹೇಬ ಠಾಕರೆಯವರ ರೂವಾರಿತನದಲ್ಲಿ ಪ್ರಾರಂಭವಾದ ಈ ಚಳುವಳಿ ಒಂದು ದೊಡ್ಡ ರಾಜಕೀಯ ಶಕ್ತಿಯಾಗಿ ಬೆಳೆಯಿತು. ಆ ಶಕ್ತಿ ಕನ್ನಡಿಗರ ಮೇಲೆಸಗಿದ ಕಷ್ಟ ಕೋಟಲೆಗಳು ಅಷ್ಟಿಷ್ಟಲ್ಲ. ಅದು ಸ್ವಾಭಾವಿಕವೇ - ಈಗ ನಮ್ಮೂರುಗಳಲ್ಲಿ ಪರಭಾಷಿಯರು ಬಂದು ನೆಲೆ ಊರಿದರೆ ನಮಗೆ ಆಗೋ ಹಾಗೇ ಅವರಿಗೂ ಆಗಿತ್ತು. ಆದರೂ ಸ್ವಲ್ಪ ಕಾಲದಲ್ಲೇ ಅದೆಲ್ಲಾ ತಣ್ಣಗಾಯಿತು. ತರುವಾಯ ಅನ್ಯೋನ್ಯತೆ ಬಂದಿತು. ಆಗ ನಡೆದದ್ದು ನಾನು ಕಂಡಿರಲಿಲ್ಲ ಆದರೆ ಅನುಭವಿಸಿದವರಿಂದ ಕೇಳಿದ್ದು ಹೀಗಿದೆ.
೧೯೭೦ಕ್ಕೆ ಮೊದಲು ಹೆಚ್ಚಿನ ಸರಕಾರಿ ಕ್ಷೇತ್ರಗಳಲ್ಲಿ ಉನ್ನತಾಧಿಕಾರಿಗಳು ಕನ್ನಡಿಗರಾದ್ದು ನೌಕರಿ ಭರ್ತಿ ಮಾಡುವಾಗ ಕನ್ನಡಿಗರಿಗೇ ಆದ್ಯತೆ ಕೊಡುತ್ತಿದ್ದರು. ಹಿಗಾಗಿ ಇಲ್ಲಿಯ ಮರಾಠಿಗರಿಗೆ ಕೆಲಸ ಸಿಕ್ಕೋದು ಕಷ್ಟ ಆಗ್ತಿತ್ತು. ಆಗ ಶಿವಸೇನೆಯು ಪ್ರಾಬಲ್ಯಕ್ಕೆ ಬರುತ್ತಿದ್ದ ಕಾಲ. ಅವರು ಸ್ಥಾನೀಯ ಲೋಕಾಧಿಕಾರ ಸಮಿತಿ ಎಂದು ಎಲ್ಲ ಸಾರ್ವಜನಿಕ ಕ್ಷೇತ್ರಗಳಲ್ಲೂ ಪ್ರಾರಂಭಿಸಿ ಮರಾಠಿಯೇತರರಿಗೆ ( ಅದರಲ್ಲೂ ಮುಖ್ಯವಾಗಿ ಕನ್ನಡಿಗರಿಗೆ ) ತೊಂದರೆ ಕೊಡಲು ಪ್ರಾರಂಭಿಸಿದರು. ಹೀಗಾದರೂ ಇವರುಗಳು ಮುಂಬಯಿ ಬಿಟ್ಟು ಹೋಗಲಿ ಅನ್ನೋದು ಅವರ ಇಂಗಿತ. ಈ ನಿಟ್ಟಿನಲ್ಲಿ ಮೊದಲನೆಯ ಕೆಲಸವಾಗಿ ಕನ್ನಡಿಗರನ್ನು ಗುರುತಿಸಲು ಶುರು ಮಾಡಿದರು. ಹೇಗೆ ಹುಡುಕೋದು - ಇವರುಗಳು ಮರಾಠಿ ಕಲಿತು ಇಲ್ಲಿಯ ಜನಜೀವನದಲ್ಲಿ ಸೇರಿ ಹೋಗಿದ್ದಾರೆ. ಲೋಕಲ್ ಟ್ರೈನ್ ನಲ್ಲಿ ಪ್ರಯಾಣ ಮಾಡುವಾಗ ಕನ್ನಡ ಮಾತನಾಡುವವರನ್ನು ಕಂಡು ಗುರುತಿ ಹಾಕಿಕೊಳ್ಳುತ್ತಿದ್ದರು. ನಂತರ ಟ್ರೈನ್ಗಳಲ್ಲಿ ಕುಳಿತುಕೊಳ್ಳುವ ಜಾಗಕ್ಕಾಗಿ ಜಗಳ ಮಾಡೋದು, ರಸ್ತೆಯಲ್ಲಿ ಓಡಾಡುವಾಗ ಮಕ್ಕಳಿಗೆ ಹೇಳಿಸಿ ಕಲ್ಲು ಹೊಡೆಸೋದು, ವಿನಾಕಾರಣ ಜಗಳ ಮಾಡೋದು ಮಾಡುತ್ತಿದ್ದರು. ಸುಮಾರು ಜನಗಳು ಬೇಸತ್ತು ಮುಂಬಯಿ ಬಿಟ್ಟು ಹೋದರು. ಹಾಗಾಗಿ ಕನ್ನಡಿಗರು ಮನೆಯಲ್ಲಿ ಮಾತ್ರವೇ ಕನ್ನಡ ಮಾತನಾಡುವ ಹಾಗೆ ಆಯಿತು. ಆಚೆಯಲ್ಲಿ ಮರಾಠಿ ಅಥವಾ ಹಿಂದಿಯಲ್ಲಿ ಸಂವಾದ - ವ್ಯವಹಾರ. ಕನ್ನಡಿಗರ ಪಾಳ್ಯ ಎನಿಸಿದ್ದ ವಾಸಸ್ಥಳಗಳಿಂದ ದೂರದ ಹೊರವಲಯಕ್ಕೆ ವಲಸೆ ಹೋದರು. ಹಾಗಾಗಿ ಕನ್ನಡ ಬಳಕೆ ಕಡಿಮೆ ಆಯಿತು. ಇತ್ತೀಚಿನ ದಿನಗಳಲ್ಲಿ ( ಕಳೆದ ಹತ್ತು ವರುಷಗಳಿಂದ ) ಶಿವಸೇನೆ ರಾಜಕೀಯದಲ್ಲಿ ದುರ್ಬಲರಾಗುತ್ತಿದ್ದು ಕನ್ನಡಿಗರನ್ನು ಓಲೈಸಹತ್ತಿದರು. ಹಾಗಾಗಿ ಈಗ ಮತ್ತೆ ಕನ್ನಡಕ್ಕೆ ಆದ್ಯತೆ ಬರುತ್ತಿದೆ. ಈಗ ಇಲ್ಲಿಯ ರಾಜ್ಯಪಾಲರು ಕನ್ನಡದವರೇ ಆಗಿ ವಿಶೇಷ ಮಹತ್ವ ಬಂದಿದೆ. ಶ್ರೀ ಕೃಷ್ಣ ಅವರು ಇಲ್ಲಿಯ ಹುತಾತ್ಮ ಚೌಕದಲ್ಲಿ ಗಡಿನಾಡಿನಲ್ಲಿ ಹುತಾತ್ಮರಾದವರ ನೆನಪಿಗೆ ಅಲ್ಲಿಯ ಪ್ರತಿಮೆಗೆ ಮಾಲಾರ್ಪಣೆ ಮಾಡಲು ಹೋದಾಗ ಶಿವಸೇನೆಯವರಿಂದ ಸ್ವಲ್ಪ ಗುಲ್ಲು ಶುರುವಾಗಿತ್ತು. ಆದು ತಕ್ಷಣವೇ ತಣ್ಣಗಾಯಿತು. ಈ ಹುತಾತ್ಮ ಚೌಕ್ ನಿರ್ಮಾಣವಾಗಿದ್ದೇ ಕರ್ನಾಟಕ ಮಹಾರಾಷ್ಟ್ರ ಗಡಿ ವಿವಾದದ ಸಮಯದಲ್ಲಿ ಹೊಡೆದಾಟದಿಂದ ಮೃತರಾದವರ ಸ್ಮರಣೆಗಾಗಿ.
ಸದ್ಯಕ್ಕೆ ಮುಂಬಯಿ ಕನ್ನಡಿಗರ ಸ್ಥಿತಿ ಗತಿ ಬಗ್ಗೆ ನನ್ನ ಎರಡು ಮಾತುಗಳನ್ನು ಇಲ್ಲಿಗೆ ನಿಲ್ಲಿಸುತ್ತಿದ್ದೀನಿ. ಇನ್ನೂ ಹೆಚ್ಚಿನದು ಮುಂದಿನ ಸಂಚಿಕೆಯಲ್ಲಿ.

- tvsrinivas41 ರವರ ಬ್ಲಾಗ್
- Login or register to post comments
- 1089 hits
- ಈ ಪುಟವನ್ನು ಇ-ಮೇಯ್ಲ್ ಮಾಡಿ






RSS:
ಪ್ರತಿಕ್ರಿಯೆಗಳು
Re: ಮುಂಬೈನ ಪರಿಚಯ
ನಿಮ್ಮ ವಿವರಣೆ ಅದ್ಭುತವಾಗಿದೆ. ಮುಂಬಯಿಯಲ್ಲಿ ಹಲವು ವರ್ಷ ವಾಸಿಸಿದ್ದ ನನಗೆ ಕಣ್ಣಿಗೆ ಕಟ್ಟಿದಂತಾಗುತ್ತಿದೆ.
ಆದರೂ, ದಯವಿಟ್ಟು ಬೇಸರ ಮಾಡಬೇಡಿ - ಈ ವಾಕ್ಯದಲ್ಲಿ ಸ್ವಲ್ಪ ಬೆರಳಚ್ಚಿನ ತಪ್ಪಾಗಿದೆ. ಅದು ಉಪಾಹಾರ ಗೃಹ ಎಂದಿರಬೇಕು. ಸಮಯವಿದ್ದಲ್ಲಿ ಈ ಲೇಖನ ಓದಿ.
ಸಿಗೋಣ,
ಪವನಜ
ತಪ್ಪು
ಹೌದು ಸರ್, ಇದು ತಪ್ಪಾಗಿದೆ. ಮುದ್ರಾರಾಕ್ಷಸನ ಹಾವಳಿ. ನಿಮ್ಮ ಹಾಸ್ಯ ಲೇಖನವನ್ನು ನಾನು ಮೊದಲೇ ಓದಿದ್ದೆ. ನಾನೂ ಕೂಡಾ ವಿಶ್ವಕನ್ನಡದ ಸದಸ್ಯ. ಆದರೆ ಈಗೀಗ ಹೆಚ್ಚಾಗಿ ಬರಲಾಗುತ್ತಿಲ್ಲವಷ್ಟೇ.
ವಂದನೆಗಳೊಂದಿಗೆ
---
ತವಿಶ್ರೀನಿವಾಸ
http://asraya.net
ಹುತಾತ್ಮ ಚೌಕ್
ಸರ್ ಕ್ಷಮಿಸಿ,
ಹುತಾತ್ಮ ಚೌಕ್ ನಿರ್ಮಾಣವಾಗಿದ್ದು ಕೇವಲ ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದದಿಂದಲ್ಲ ಎಂಬುದು ನನ್ನ ಗ್ರಹಿಕೆ. ಅದೂ ಒಂದು ಕಾರಣವಷ್ಟೇ. ರಾಜ್ಯಗಳ ಪುರ್ನವಿಂಗಡನೆಯ ಸಂದರ್ಭದಲ್ಲಿ ಆ ಕಾಲಕ್ಕೆ ಹೆಚ್ಚು ಗುಜರಾತಿಗಳು, ದಕ್ಷಿಣ ಭಾರತೀಯರು ಹೀಗೆ ವಲಸೆ ಬಂದವರು ಹೆಚ್ಚಾಗಿದ್ದ ಮುಂಬಯಿಯನ್ನು ಮರಾಠಿ ಬಹುಸಂಖ್ಯಾತ ಮಹಾರಾಷ್ಟ್ರದಿಂದ ಪ್ರತ್ಯೇಕಿಸಿ ಪ್ರತ್ಯೇಕ ಪ್ರಾಂತ್ಯ ಮಾಡಲು ಕೇಂದ್ರ ಸರ್ಕಾರ ಮುಂದಾಗಿದೆ ಎಂಬ ವಿಚಾರ ಆಗಿನ ಮುಂಬಯಿ-ಮರಾಠಿ ಸಮುದಾಯದಲ್ಲಿ ಪ್ರಚಾರಕ್ಕೆ ಬಂದು, ಇದಕ್ಕೆ ಕಾರಣ, ಆಗಿನ ಅಮರಾಠಿ ಮುಖ್ಯಮಂತ್ರಿ ಮೊರಾರ್ಜಿ ದೇಸಾಯಿಯವರು ಎಂಬ ಗುಮಾನಿಯೂ ಸೇರಿ ಮಿಲ್ ಕಾರ್ಮಿಕರ ಸಂಘರ್ಷದ ರೂಪದಲ್ಲಿ ಸಂಯುಕ್ತ ಮಹಾರಾಷ್ಟ್ರ ಹೋರಾಟ ಪ್ರಾರಂಭವಾಯಿತು. ಮುಂಬಯಿಯಲ್ಲಿ ಪ್ರಾರಂಭವಾದ ಈ ಹೋರಾಟ ಮುಂದೆ, ಬೆಳಗಾವಿ, ಗೋವಾ ಭಾಗಗಳಲ್ಲಿದ್ದ ಮರಾಠಿ ಜನರ ಅಸಮಾಧಾನವೂ ಸೇರಿಕೊಂಡು 'ಸಂಯುಕ್ತ ಮಹಾರಾಷ್ಟ್ರ ಹೋರಾಟವು' ಉಗ್ರ ರೂಪ ತಳೆಯಿತು. ಈ ಹೋರಾಟದ ಸಂದರ್ಭದಲ್ಲಿ ನಡೆದ ಗೋಲಿಬಾರ್ಗಳಲ್ಲಿ ೧೦೫ ಜನರು ಸಾವಿನ್ನಪ್ಪಿದರು. ಇವರುಗಳಲ್ಲಿ ಬೆಳಗಾವಿಯಲ್ಲಿ ಇಬ್ಬರು ಹಾಗೂ ನಿಪ್ಪಾಣಿಯಲ್ಲಿ ಒಬ್ಬರು ಸೇರಿದ್ದಾರೆ. ಈ ಹೋರಾಟದಲ್ಲಿ ನಾಶಿಕದಲ್ಲಿಯೂ ಕೆಲವರು ಮಡಿದರು. ಹೆಚ್ಚಿನವರು ಮಡಿದದ್ದು ಮುಂಬಯಿಯಲ್ಲಿ. ಈ ಒಟ್ಟೂ ಹೋರಾಟದ ಸ್ಮರಣೆಗೆ ಹುತಾತ್ಮ ಚೌಕ್ ನರ್ಮಿಸಲಾಯಿತು, ೧೯೬೧ ರಲ್ಲಿ. ಹಿಂದೆ ಫ್ಲೋರಾ ಫೌಂಟೇನ್ ಎಂದಿದ್ದ ಈ ಪ್ರದೇಶ ಈಗ ಹುತಾತ್ಮ ಚೌಕ್ ಆಗಿದೆ. ತಪ್ಪಿದ್ದರೆ ತಿದ್ದಿಕೊಳ್ಳುತ್ತೇನೆ.
ರೋಹಿತ್.
ಸರಿ ಇದೆ
ರೋಹಿತ್ ಅವರು ಹೇಳುತ್ತಿರುವುದು ಸರಿಯಿದೆ. ಆದರೆ ಈ ಲೇಖನವನ್ನು ಇಲ್ಲಿ ಏರಿಸಿದ್ದು ಬಹಳ ಹಿಂದೆ. ಈಗ ಸರಿಪಡಿಸಲಾಗುವುದಿಲ್ಲ (ಆರ್ಕೈವ್ನಲ್ಲಿದೆ). ನನಗೂ ಇದರ ಬಗ್ಗೆ ಮೊದಲು ಗೊತ್ತಿರಲಿಲ್ಲ. ಹಿಂದೊಂದು ಕಡೆ ಇದನ್ನು ಪ್ರಕಟಿಸಿದ್ದಾಗ ಯಾರೋ ನನಗೆ ಉತ್ತರಿಸಿದ್ದರು.
ಆದರೆ ಬರೆಯುವಾಗ ನನ್ನ ಸ್ನೇಹಿತರೊಬ್ಬರು ಈ ಕಾರಣ ಕೊಟ್ಟಿದ್ದರು. ಅದು ಸರಿಯಲ್ಲವೆಂದು ನಂತರ ತಿಳಿಯಿತು.
ಸರಿ ಹೇಳಿಕೆ ಕೊಟ್ಟಿದ್ದುದಕ್ಕೆ, ಧನ್ಯವಾದಗಳು ರೋಹಿತ್.
ವಂದನೆಗಳೊಂದಿಗೆ
---
ತವಿಶ್ರೀನಿವಾಸ
http://asraya.net